ತಲ್ಲಣಿಸದಿರು ಕಂಡ್ಯ

ಕನಕದಾಸರು

ತಲ್ಲಣಿಸದಿರು ಕಂಡ್ಯ ತಾಳು ಮನವೆ || ಪ ||

ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ || ಅ.ಪ. ||

ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆ

ಕಟ್ಟೆಯನು ಕಟ್ಟಿ ನೀರೆರೆದವರು ಯಾರೊ

ಪುಟ್ಟಿಸಿದ ಸ್ವಾಮಿ ತಾ ಹೊಣೆಗರನಾಗಿರಲು

ಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ || ೧ ||

ಅಡವಿಯೊಳಗಾಡುವ ಮೃಗ ಪಕ್ಷಿಗಳಿಗೆಲ್ಲ

ಅಡಿಗಡಿಗೆ ಆಹಾರವಿತ್ತವರು ಯಾರೊ

ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ

ಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ || ೨ ||

ನವಿಲಿಗೆ ಚಿತ್ರ ಬರೆದವರು ಯಾರು

ಪವಳದ ಲತೆಗೆ ಕೆಂಪಿಟ್ಟವರು ಯಾರು

ಸವಿಮಾತಿನರಗಿಳಿಗೆ ಹಸುರು ಬರೆದವರು ಯಾರು

ಅವನೆ ಸಲಹುವನು ಇದಕೆ ಸಂಶಯವಿಲ್ಲ || ೩ ||

ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ

ಅಲ್ಲಲ್ಲಿಗಾಹಾರ ತಂದವರಾರು

ಬಲ್ಲಿದನು ಕಾಗಿನೆಲೆಯಾದಿಕೇಶವರಾಯ

ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ || ೪ ||